ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಆಕಾಂಕ್ಷಿಯಾಗಿದ್ದಾರೆ. ಆದರೆ, ಇದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದು, ಸ್ಥಳೀಯ ನಾಯಕರಿಗೆ ಟಿಕೆಟ್ ನೀಡುವ ಚಿಂತನೆಯಲ್ಲಿದ್ದಾರೆ. ಹೀಗಾಗಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಭವಾನಿ ರೇವಣ್ಣ ಅವರು ತಾವೇ ಅಭ್ಯರ್ಥಿ ಎಂದು ಈಗಾಗಲೇ ಬಿಂಬಿಸಿಕೊಂಡಿರುವುದು ತೀವ್ರ ಚರ್ಚೆಗೂ ಗ್ರಾಸವಾಗಿದೆ. ಹಾಸನ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಗಿದರೂ ಹಾಸನ ಕ್ಷೇತ್ರದಲ್ಲಿ ಮಾತ್ರ ಸಂಚರಿಸದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ನಾಲ್ಕನೇ ಹಂತದ ಪಂಚರತ್ನ ರಥಯಾತ್ರೆಯು ಹಾಸನ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸಾಗಲಿದೆ. ಹಾಸನ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ಸಾಗಿದರೂ, ಹಾಸನ ವಿಧಾನಸಭಾ ಕ್ಷೇತ್ರ ಪ್ರವೇಶಿಸದಂತೆ ರಥಯಾತ್ರೆ ಯೋಜಿಸಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.


ಭವಾನಿ ಕಳೆದ ಬಾರಿಯ ಚುನಾವಣೆಯಲ್ಲೇ ಸ್ಪರ್ಧೆ ಮಾಡಲು ಉತ್ಸುಕರಾಗಿದ್ದರು. ಆದ್ರೆ ಪದೇ ಪದೇ ಕುಟುಂಬ ರಾಜಕಾರಣದ ಹಣೆಪಟ್ಟಿ ಬಿಳುತ್ತಿದ್ದುದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ಕುಮಾರಸ್ವಾಮಿ ಆಗ ನಮ್ಮ ಕುಟುಂಬದಿಂದ ಇಬ್ಬರು ಮಾತ್ರಾ ಸ್ಪರ್ಧೆ ಮಾಡೋದಾಗಿ ಹೇಳಿಬಿಟ್ಟಿದ್ರು. ಅದೇ ಕಾರಣಕ್ಕೆ ಭವಾನಿಗೆ ಆಗ ಟಿಕೆಟ್ ತಪ್ಪಿ ಹೋಗಿತ್ತು. 

ರಾಜ್ಯದಾದ್ಯಂತ ದೊಡ್ಡ ಅಲೆ ಕ್ರಿಯೇಟ್ ಮಾಡಿದ್ದ ಕುಮಾರಸ್ವಾಮಿ ಪಂಚರತ್ನ ಯಾತ್ರೆ ಹಾಸನ ಗೊಂದಲದ ವಿಚಾರ ಶುರುವಾಗಿದ್ದೇ ದಿಢೀರನೆ ತಳಕಚ್ಚುವಂತಾಯ್ತು. ಇದೀಗ ಹಾಸನಕ್ಕೆ ಮತ್ತೊಮ್ಮೆ ಎಂಟ್ರಿ ಕೊಡುತ್ತಿರುವ ಪಂಚರತ್ನ ಯಾತ್ರೆಗೂ ಮೊದಲು ತಿಪಟೂರಿನಲ್ಲಿ ಒಕ್ಕಲಿಗರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಕುಮಾರಸ್ವಾಮಿ. ಬಳಿಕ ಬೇಲೂರಿನ ಹಗರೆಯಿಂದ ರಥಯಾತ್ರೆ ಸಂಚರಿಸಲಿದೆ. ಅಂದು ರಾತ್ರಿ ಅಲ್ಲಿಯೇ ಗ್ರಾಮ ವಾಸ್ತವ್ಯ ಹೂಡುವ ಎಚ್.ಡಿ.ಕುಮಾರಸ್ವಾಮಿ, ಬೆಳಗ್ಗೆ ರಥಯಾತ್ರೆ ಮತ್ತು ರಸ್ತೆಬದಿ ಸಭೆಗಳನ್ನು ನಡೆಸಲಿದ್ದಾರೆ. ತದನಂತರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಾ.12 ರಂದು ಆನೇಕಲ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಯಾತ್ರೆ ಮುಕ್ತಾಯವಾದ ಬಳಿಕ ಮಾ.18ರಂದು ಚಿಕ್ಕಮಗಳೂರು ಜಿಲ್ಲೆ ಕಡೂರು, ಮಾ.19ರಂದು ಮೈಸೂರು ಜಿಲ್ಲೆಯ ಟಿ.ನರಸೀಪುರ, ಮಾ.21ರಂದು ಬೆಂಗಳೂರಿನ ಹೆಬ್ಬಾಳ, ಮಾ.23ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ನಲ್ಲಿ ಯಾತ್ರೆಯು ಸಂಚರಿಸಲಿದೆ



