ಮುಡಾ ಹಗರಣ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆಯುತ್ತಿದೆ. ಸಿಎಂ ಆಗಿರುವ ಸಿದ್ದರಾಮಯ್ಯ ನಿಜಕ್ಕೂ ತಪ್ಪು ಮಾಡಿದ್ದಾರೆಯೇ.. ಇಲ್ಲವೇ.. ಎನ್ನುವುದು ತನಿಖೆಯಲ್ಲಿ ಸಾಬೀತಾಗಬೇಕಿರುವ ಅಂಶ. ಆದರೆ ಈ ಹಗರಣದಲ್ಲಿ ಇಷ್ಟು ದಿನ ನೇಪಥ್ಯದಲ್ಲೇ ಇದ್ದ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರು ರಾಜಕೀಯದಲ್ಲಿ ಚರ್ಚೆಯಾಗಿದ್ದು ವಿಶೇಷ. ಇದೀಗ ಅದೇ ಪಾರ್ವತಿಯವರು ತಮಗೆ ಬಂದಿದ್ದ ಎಲ್ಲ ೧೪ ಮುಡಾ ನಿವೇಶನಗಳನ್ನೂ ವಾಪಸ್ ತೆಗೆದುಕೊಳ್ಳುವಂತೆ ಮುಡಾಗೆ ಮನವಿ ಮಾಡಿದ್ದಾರೆ. ಇದನ್ನು ತಮ್ಮ ಪತಿ ಸಿದ್ಧರಾಮಯ್ಯ ಅವರಿಗೂ ಗೊತ್ತಿಲ್ಲದಂತೆ ಮಾಡಿದ್ದಾರೆ ಎನ್ನುವುದೇ ವಿಶೇಷ.
…ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ರಾಜಜಕೀಯವಾಗಿ ಆಗುತ್ತಿರುವ ಸಂಕಷ್ಟವನ್ನು ನೋಡಲಾಗದೇ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಗಮನಿಸಬೇಕಾದ ಅಂಶ ಅಂದ್ರೆ, ಸಾರ್ವತಿ ಅವರು ಬರೆದ ಪತ್ರದಲ್ಲಿ ದಿನಾಂಕ ಇಲ್ಲ. ಅಷ್ಟೇ ಅಲ್ಲ, ಪತ್ರದ ಪ್ರಕಾರ ಸಿದ್ದರಾಮಯ್ಯ ಅವರಿಗೆ ತಮ್ಮ ಪತ್ನಿ ಮುಡಾ ಸೈಟುಗಳನ್ನು ವಾಪಸ್ ಮಾಡುತ್ತಿರುವುದು ಗೊತ್ತಿಲ್ಲ. ಸಿದ್ದರಾಮಯ್ಯ ಅವರ ಟ್ವೀಟ್ ನೋಡಿದರೆ, ಸಿದ್ದರಾಮಯ್ಯ ಅವರಿಗೂ ಈ ಬಗ್ಗೆ ಮಾಹಿತಿ ಇಲ್ಲ ಎಂದು ಅರ್ಥವಾಗುತ್ತದೆ.
ಪಾರ್ವತಿ ಸಿದ್ದರಾಮಯ್ಯ ಪತ್ರದಲ್ಲಿ ಏನಿದೆ..?
ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿತ್ತು ಎಂದು ಪ್ರಸ್ತಾಪಿಸಿರುವ ಪಾರ್ವತಿ ಸಿದ್ದರಾಮಯ್ಯ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತಿರುವುದಾಗಿ ಪತ್ರದಲ್ಲಿ ಹೇಳಿದ್ದಾರೆ.
ಪತಿ ಸಿದ್ದರಾಮಯ್ಯಗೂ ಗೊತ್ತಿಲ್ಲದೆ ನಿರ್ಧಾರ..!
ಪತ್ರದಲ್ಲಿ ಪತಿ ಸಿದ್ದರಾಮಯ್ಯ ಅವರ ಹೆಸರನ್ನೂ ಉಲ್ಲೇಖಿಸಿದ್ದಾರೆ. ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.
ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ.
ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ. ಎಂದು ಬರೆಯುತ್ತಾರೆ ಪಾರ್ವತಿ ಸಿದ್ದರಾಮಯ್ಯ.
ಇಲ್ಲಿ ಅತ್ಯಂತ ಸ್ಪಷ್ಟವಾಗಿ ನನ್ನ ಪತಿಯವರ ನಿರ್ಧಾರ ಏನು ಅನ್ನೋದು ನನಗೆ ಗೊತ್ತಿಲ್ಲ ಎನ್ನುತ್ತಾರೆ. ತಾವೇ ಪ್ರಜ್ಞಾಪೂರ್ವಕವಾಗಿ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದೂ ಹೇಳುತ್ತಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ಧರಾಮಯ್ಯ ಕೂಡಾ ನನ್ನ ಪತ್ನಿಯ ನಿರ್ಧಾರ ನನಗೂ ಅಚ್ಚರಿ ತಂದಿದೆ. ಆದರೆ ಅವರ ನಿರ್ಧಾರವನ್ನು ಗೌರವಿಸುತ್ತೇನೆ ಎನ್ನುತ್ತಾರೆ. ನನಗೂ ಅಚ್ಚರಿ ತಂದಿದೆ ಎನ್ನುವ ಮೂಲಕವೇ ತಮಗೆ ಈ ಮೊದಲು ಮಾಹಿತಿ ಇಲ್ಲ ಎಂದು ಹೇಳುತ್ತಾರೆ ಸಿದ್ದರಾಮಯ್ಯ.
ಒಟ್ಟಿನಲ್ಲಿ ಮುಡಾ ಸೈಟು ಹಗರಣ ಹಲವು ತಿರುವು ಪಡೆದುಕೊಳ್ಳುತ್ತಿದೆ. ಆದರೆ ಇಲ್ಲಿಗೇ ಇದು ಮುಗಿಯುತ್ತದಾ..? ಗೊತ್ತಿಲ್ಲ.



